ಕೋವಿಡ್ ನಿಯಂತ್ರಿಸಲು ಶ್ರಮಿಸುತ್ತಿರುವ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಮಂತ್ರಿಯವರಿಂದ ಅಭಿನಂದನೆ
ಹಾಸನ,ಸೆ.10(ಕರ್ನಾಟಕ ವಾರ್ತೆ):- ಕೋವಿಡ್ ಹರಡುವುದನ್ನು ನಿಯಂತ್ರಿಸಲು ಹೆಚ್ಚು ಆಸಕ್ತಿವಹಿಸಿ ಶಕ್ತಿಮೀರಿ ಶ್ರಮಿಸುತ್ತಿರುವ ರಾಜ್ಯದ ಪ್ರತಿಯೊಂದು ಜಿಲ್ಲೆಯ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್ ನಿರ್ವಹಣೆಯನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನಿಗಾವಹಿಸಿ ಪರಿಣಾಮಕಾರಿಯಾಗಿ ನಿಭಾಯಿಸುವುದರ ಮೂಲಕ ಮರಣ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದರು.
ಮಳೆಯಿಂದ ನಷ್ಟವಾಗಿರುವ ಬೆಳೆ, ರಸ್ತೆ ಮತ್ತು ಸೇತುವೆಗಳು, ಮನೆಗಳು ಕುರಿತು ಮಾಹಿತಿ ಪಡೆದ ಮುಖ್ಯ ಮಂತ್ರಿಯವರು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಹಾಳಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಾತ್ಕಾಲಿಕವಾಗಿ ದುರಸ್ಥಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗುವುದನ್ನು ಕಾಯದೆ, ಜಿಲ್ಲೆಗಳಿಗೆ ಅಗತ್ಯವಿರುವ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಅದನನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮುಖ್ಯ ಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ತಕ್ಷಣ ಪರಿಹಾರ ಧನ ನೀಡಬೇಕು ಎಂದರಲ್ಲದೆ, ಪ್ರವಾಹ ಪೀಡಿತರಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ಸಹ ಬಿಡುಗಡೆ ಮಾಡಿ ಆದಷ್ಟು ಬೇಗ ಮನೆ ನಿರ್ಮಿಸಿ ಕೊಡಬೇಕು ಎಂದ ಮುಖ್ಯ ಮಂತ್ರಿಯವರು ಯಾವುದೇ ರೀತಿಯ ಆರೋಪಗಳಿಗೆ ಆಸ್ಪದ ನೀಡದೆ ಹೆಚ್ಚು ಜಾಗರೂಕತೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ರಾಜ್ಯದ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಮಾತನಾಡಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸುವುದರ ಜೊತೆಗೆ ಪ್ರಾಥಮಿಕ ಸಂಪರ್ಕ ಪತ್ತೆ ಹಚ್ಚುವಂತೆ ಸೂಚಿಸಿದರಲ್ಲದೆ, ಪಾಸಿಟಿವ್ ಪ್ರಕರಣಕ್ಕೆ ಅನುಗುಣವಾಗಿ ಸರ್ವೆ ಮಾಡಲು ಕ್ರಮವಹಿಸುವಂತೆ ತಿಳಿಸಿದರು. ಐ.ಇ.ಸಿ. ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಅರಿವು ಮೂಡಿಸಿ ಎಂದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ, ಮಳೆ, ಬೆಳೆ ನಷ್ಟ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ||ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಸತೀಶ್, ಡಿ.ವೈ.ಎಸ್.ಪಿ.ಪುಟ್ಟಸ್ವಾಮಿಗೌಡ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಂಪಾದಕರು
ಹರೀಶ್ ಹೆಚ್ ಆರ್
ಕೋಟೆ.
*************
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info